ಬೆಂಗಳೂರು, ಜೂನ್.6, ನ್ಯೂಸ್ ಎಕ್ಸ್ ಪ್ರೆಸ್ : ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ತೀವ್ರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇರಳದಲ್ಲಿ ಕಳೆದ ವರ್ಷ 17 ಮಂದಿ ನಿಫಾ ವೈರಸ್ ಗೆ ಬಲಿಯಾಗಿದ್ದು, ಈ ಬಾರಿ 5 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳದ ಗಡಿ ಪ್ರದೇಶಗಳಲ್ಲಿಯೂ ಕೂಡ ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದ್ದು, ಈ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಿಫಾ ಬಗ್ಗೆ ನಿಗಾ ಇಡುವಂತೆ ಸರ್ಕಾರಿ ಆಸ್ಪತ್ರೆಗಳಿಗೂ ತಿಳಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ.ಬಿ.ಜಿ.ಪ್ರಕಾಶ್ ಕುಮಾರ್ ಹೇಳಿದರು.