ನವದೆಹಲಿ, ಜೂನ್.10, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ರಾಹುಲ್ ಗಾಂಧಿ ನಡೆಯಿಂದ ಚಿಂತಾಕ್ರಾಂತರಾಗಿರುವ ಹಿರಿಯ ಕಾಂಗ್ರೆಸ್ಸಿಗರು ಸರಣಿ ಸಭೆಗಳನ್ನು ನಡೆಸಿ 3 ಆಯ್ಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿ ದ್ದಾರೆ. ಈ ಪೈಕಿ ನೆಹರು- ಗಾಂಧಿ ಕುಟುಂಬದಿಂದ ಹೊರಗಿನ ವ್ಯಕ್ತಿಗಳನ್ನು ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾವವೂ ಇದ್ದು, ಕರ್ನಾಟಕದ ಹಿರಿಯ ಕಾಂಗ್ರೆಸ್ಸಿಗ, ಲೋಕಸಭೆಯಲ್ಲಿನ ಕಾಂಗ್ರೆಸ್ ಮಾಜಿ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ. ರಾಜೀನಾಮೆಗೆ ರಾಹುಲ್ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಕಾಂಗ್ರೆಸ್ ನಲ್ಲಿ ಡಜನ್ಗಟ್ಟಲೆ ಸಭೆಗಳು ನಡೆದಿವೆ. ಪುಟ್ಟ ಪುಟ್ಟ ಗುಂಪುಗಳಾಗಿ ಅಥವಾ ಕೆಲವು ನಾಯಕರು ಮುಖಾಮುಖಿಯಾಗಿ ಈ ಸಭೆಗಳನ್ನು ನಡೆಸಿದ್ದಾರೆ. ಮನಮೋಹನ ಸಿಂಗ್, ಎ.ಕೆ. ಆ್ಯಂಟನಿ, ಅಹಮದ್ ಪಟೇಲ್, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಆನಂದ ಶರ್ಮಾ, ಪೃಥ್ವಿರಾಜ್ ಚವಾಣ್ ಹಾಗೂ ಪ್ರಿಯಾಂಕಾ ಗಾಂಧಿ ಅವರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.