ಬೆಂಗಳೂರು, ಮೇ. 8, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಗೂ ಮೊದಲು ಇದ್ದ ಪರಿಸ್ಥಿತಿ ಈಗ ಇಲ್ಲ. ರಾಜ್ಯ ರಾಜಕೀಯದಲ್ಲಿ ನಿಗೂಢ ಬೆಳವಣಿಗೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.
ರಮೇಶ್ ಜಾರಕಿಹೊಳಿ ನೇತೃತ್ವದ ಅತೃಪ್ತ ಕಾಂಗ್ರೆಸ್ ಶಾಸಕರ ಬಂಡಾಯಕ್ಕೆ ಯಶಸ್ಸು ಸಿಕ್ಕಿಲ್ಲ. ಬಿಜೆಪಿ ಆಪರೇಷನ್ ಕಮಲ ಯಶಸ್ವಿಯಾಗಿಲ್ಲ. ಈ ಆತಂಕಗಳಿಂದ ನಿರಾಳವಾಗಿದ್ದ ಕುಮಾರಸ್ವಾಮಿಗೆ ದೋಸ್ತಿ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಬಲಿಗರು ತಳಮಳ ಹೆಚ್ಚಿಸಿದ್ದಾರೆ.
ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಕಾಂಗ್ರೆಸ್ ಪಕ್ಷದ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ನಿಗಮ, ಮಂಡಳಿಯ ಅಧ್ಯಕ್ಷರಾಗಿದ್ದರೂ, ನಮಗೆ ಅಧಿಕಾರ ಚಲಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಕೆಲವು ಶಾಸಕರು ಅತೃಪ್ತಿ ಹೊರಹಾಕಿದ್ದು, ಸಮಾನ ಮನಸ್ಕರ ಸಭೆ ನಡೆಸಲು ಮುಂದಾಗಿದ್ದಾರೆ.