ಹುಬ್ಬಳ್ಳಿ, ಏ. 27, ನ್ಯೂಸ್ ಎಕ್ಸ್ ಪ್ರೆಸ್: ಕುಂದಗೋಳ ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಯಡಿಯೂರಪ್ಪ ಸಂಬಂಧಿ ಸಿಎಸ್ ಚಿಕ್ಕನಗೌಡಗೆ ಟಿಕೆಟ್ ನೀಡೋ ಮುನ್ಸೂಚನೆ ಸಿಗುತ್ತಿದ್ದಂತೆ ಮತ್ತೋರ್ವ ಟಿಕೆಟ್ ಆಕಾಂಕ್ಷಿ ಎಂ.ಆರ್.ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ .
ಟಿಕೆಟ್ ಕೈತಪ್ಪುವ ಮುನ್ಸೂಚನೆ ಸಿಗುತ್ತಿದ್ದಂತೆ ಎಮ್.ಆರ್.ಪಾಟೀಲ್ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. 2018ರ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಎಮ್.ಆರ್.ಪಾಟೀಲ್ ಬೇಸರಗೊಂಡಿದ್ದರು. ಉಪಚುನಾಣೆಯಲ್ಲಾದರು ಟಿಕೆಟ್ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದರು.
ಸದ್ಯ ಎಂ.ಆರ್.ಪಾಟೀಲ್ ನಡೆಯಿಂದ ಹೈಕಮಾಂಡ್ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಒಂದುಕಡೆ ಪಾಟೀಲ್ ಗೇ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಸದ್ಯ ಎಂ.ಆರ್. ಪಾಟೀಲ್ ಯಾರ ಸಂಪರ್ಕಕ್ಕೂ ಸಿಗದೇ ಇರೋದು ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.