ಧಾರವಾಡ,ಮೇ, 11: ಕೊರೋನಾ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ಡೌನ್ ನಿಂದ ಹುಬ್ಬಳ್ಳಿ ಶಹರ ಹೊರತುಪಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಹುಬ್ಬಳ್ಳಿಯ ಸೀಲ್ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ವಾಣಿಜ್ಯ, ವಹಿವಾಟುಗಳನ್ನು ನಡೆಸಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಲಾಕ್ಡೌನ್ ಸಡಿಲಿಕೆ ಕುರಿತ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಚಿವರು, ಅಂಗಡಿ ಮತ್ತು ಮುಂಗಟ್ಟು ಕಾಯ್ದೆ ಪ್ರಕಾರ ಸ್ಥಾಪಿಸಿದ ಅಗತ್ಯ ವಸ್ತುಗಳ ಪೂರೈಕೆಯ ವಾಣಿಜ್ಯ, ವಹಿವಾಟುಗಳು ಈಗಾಗಲೇ ಜಿಲ್ಲೆಯ ಪುನರ್ ಆರಂಭವಾಗಿವೆ ಎಂದು ತಿಳಿಸಿದರು.
ಹುಬ್ಬಳ್ಳಿಯ ಸೀಲ್ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಕಡೆಗಳಲ್ಲೂ ಕಿರಾಣಿ ಅಂಗಡಿ, ಹೊಟೆಲ್ಗಳಲ್ಲಿ ಪಾರ್ಸೆಲ್ ಸೇರಿ ವಿವಿಧ ವ್ಯಾಪಾರ ಚಟುವಟಿಕೆಗಳ ಪ್ರಾರಂಭಕ್ಕೆ ವಾರದ ಎಲ್ಲ ದಿನಗಳಲ್ಲಿಯೂ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲು ಸೂಚಿಸಿದ ಸಚಿವರು, ಲಾಕ್ಡೌನ್ ಸಡಿಲಿಕೆಯ ಈ ಅವಕಾಶವನ್ನು ಜಿಲ್ಲೆಯ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾಸ್ಕ್ ಧರಿಸಿ:
ಕೊರೋನಾ ನಿಯಂತ್ರಣ ಜತೆಗೆ ದೇಶದ ಭವಿಷ್ಯ, ಆರ್ಥಿಕ ಸಮತೋಲನ ಕಾಪಾಡಿಕೊಳ್ಳುವ ಹೊಣೆಗಾರಿಕೆಯೂ ಕೇಂದ್ರ ಸರ್ಕಾರದ ಮೇಲಿದೆ. ಲಾಕ್ಡೌನ್ನಿಂದ ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆ. ಇದನ್ನು ಜನತೆ ಮನಬಂದತೆ ಬಳಸಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಅನಗತ್ಯ ತಿರುಗಾಟಕ್ಕೆ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು. ಮಾಸ್ಕ್ ಧರಿಸುವಂತೆ ಕೋರಿದರು. ದೇಶದಲ್ಲೆಡೆ ಇರುವಂತೆ ಇಲ್ಲಿಯೂ ಮಾಲ್, ಮಾರುಕಟ್ಟೆ ಸಂಕೀರ್ಣಗಳು, ಬಾರ್, ರೆಸ್ಟೊರೆಂಟ್, ಜಿಮ್, ಧಾರ್ಮಿಕ ಚಟುವಟಿಕೆಗಳು, ಸಭೆ, ಸಮಾರಂಭಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ. ಎಲ್ಲ ಖಾಸಗಿ ಮತ್ತು ಸರ್ಕಾರಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನೂ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ಶೇ.೨೫ರಷ್ಟು ಕೈಗಾರಿಕಾ ಚಟುವಟಿಕೆಗಳು ಪುನರಾರಂಭವಾಗಿವೆ ಎಂದು ಹೇಳಿದರು.