ಕಲಬುರಗಿ, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಿಮೋಟ್ ಕಂಟ್ರೋಲ್ ಸಿಎಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.
ಇಂದು ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಕಂಟ್ರೋಲ್ ನಾಗಪುರದಲ್ಲಿದೆ. ಅವರೇ ಹೊಡೆದಾಡಿಕೊಂಡು ಸರ್ಕಾರ ಬೀಳಲಿ ಎಂದು ಮೋದಿ ಈ ರೀತಿ ಹೇಳಿಕೆ ನೀಡುತ್ತಾರೆ. ಅದು ಸಾಧ್ಯವಿಲ್ಲ ಎಂದರು.
ಯುಪಿಎ ಸರ್ಕಾರದ ಯೋಜನೆಗಳನ್ನು ತಮ್ಮ ಯೋಜನೆಗಳು ಎಂದು ಹೇಳಿಕೊಂಡಿದ್ದಾರೆ. ಕಲಬುರ್ಗಿಗೆ ಬಂದು ಬೆಂಗಳೂರು ಯೋಜನೆಗಳನ್ನು ಉದ್ಘಾಟಿಸಿರುವುದು ದುರಂತ ಎಂದರು. ಅಲ್ಲದೆ ಕಲಬುರ್ಗಿಗೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಕಲಬುರ್ಗಿ ಭೇಟಿ ವೇಳೆ ಮೋದಿ ಅವರು ನನ್ನ ಹೆಸರು ಪ್ರಸ್ತಾಪಿಸದೇ ಇರುವುದರ ಗುಟ್ಟೇನು ನನಗೆ ತಿಳಿದಿಲ್ಲ. ಪಾರ್ಲಿಮೆಂಟ್ ನಲ್ಲಿ ಹೆಸರನ್ನು ಪದೇ ಪದೇ ಪ್ರಸ್ತಾಪಿಸುತ್ತಿದ್ದರು. ಆದರೆ, ನಮ್ಮ ಕ್ಷೇತ್ರಕ್ಕೆ ಬಂದಾಗ ಯಾಕೆ ಪ್ರಸ್ತಾಪಿಸಿಲ್ಲ ಗೊತ್ತಾಗುತ್ತಿಲ್ಲ ಎಂದು ಹೇಳಿದರು.