ಬೆಂಗಳೂರು, ಜು. 3 : ರಾಜ್ಯದಲ್ಲಿ ಆರಂಭವಾಗಿರುವ ಅತೃಪ್ತ ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವದ ಹಿನ್ನಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ಮೋದಿ ಕೈವಾಡವಿದ್ದು, ರಾಜ್ಯದಲ್ಲಿ ಕುತಂತ್ರ ಬಿಜೆಪಿ ಹೈಕಮಾಂಡ್ ನಡೆಸಿದೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ಹೈಕಮಾಂಡ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಎಚ್.ಕೆ. ಪಾಟೀಲ್, ಸಚಿವರಾದ ಡಿ.ಕೆ. ಶಿವಕುಮಾರ್ ಮತ್ತು ಕೃಷ್ಣ ಬೈರೇಗೌಡ ಅವರು ಅತೃಪ್ತ ಶಾಸಕರ ರಾಜೀನಾಮೆ ಸಲ್ಲಿಕೆಯ ಹಿಂದೆ ಬಿಜೆಪಿ ರಾಷ್ಟ್ರೀಯ ನಾಯಕರ ಷಡ್ಯಂತ್ರವಿದೆ ಎಂದು ಆರೋಪಿಸಿದರು.
ನಂತರ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬಿಜೆಪಿಗೆ ಜನಾದೇಶ ದೊರಕಿಲ್ಲ. ಆದರೂ, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ವಾಮಮಾರ್ಗ ಅನುಸರಿಸಲು ಮುಂದಾಗಿದೆ. ಅತೃಪ್ತ ಶಾಸಕರನ್ನು ಸೆಳೆಯುತ್ತಿಲ್ಲ. ಈ ಆಪರೇಷನ್ ಹಿಂದೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇರ ಪಾತ್ರವಹಿಸಿದ್ದು, ಪ್ರಧಾನಿ ಮೋದಿ ಕೂಡ ಈ ಷಡ್ಯಂತ್ರದ ಭಾಗವಾಗಿದ್ದಾರೆ ಎಂದರು.