ನವದೆಹಲಿ, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: ಇಂದು ನಡೆಯಲಿರುವ ಪ್ರಧಾನಿ ಮೋದಿ ಅವರ ಪ್ರಮಾಣವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹಾಜರಾಗಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರು ಹಾಜರಾಗಲಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಬಗ್ಗೆ ಟ್ವೀಟ್ ಮಾಡಿರು, ”ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ‘ಸಾಂವಿಧಾನಿಕ ಆಹ್ವಾನ’ವನ್ನು ಒಪ್ಪಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲು ಸಿದ್ಧಳಾಗಿದ್ದೆ. ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ನಡೆ ಬೇಸರ ತರಿಸಿದೆ. ಪಶ್ಚಿಮ ಬಂಗಾಳದಲ್ಲಿ ಒಂದು ವರ್ಷದ ಅವಧಿಯಲ್ಲಿ 54 ಕಾರ್ಯಕರ್ತರ ಕೊಲೆಯಾಗಿದೆ ಎಂದು ಬಿಜೆಪಿ ಆರೋಪಿಸಿ, ಕೊಲೆಯಾದವರ ಕುಟುಂಬಗಳಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿದೆ. ಇದು ಸತ್ಯಕ್ಕೆ ದೂರವಾದ ಆರೋಪ. ಬಂಗಾಳದಲ್ಲಿ ರಾಜಕೀಯ ದ್ವೇಷದ ಕೊಲೆಗಳು ನಡೆದಿಲ್ಲ. ಕುಟುಂಬ ದ್ವೇಷ, ವೈಯಕ್ತಿಕ ದ್ವೇಷ ಅಥವಾ ಮತ್ತಾವುದೋ ಕಾರಣದಿಂದ ಈ ಹತ್ಯೆಗಳು ನಡೆದಿರಬಹುದು. ಇದರ ಬಗ್ಗೆ ನಮ್ಮ ಬಳಿ ಯಾವುದೇ ದಾಖಲೆಗಳೂ ಇಲ್ಲ. ಇಂತಹ ಆರೋಪಗಳ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮಕ್ಕೆ ಹಾಜರಾಗಲಾರೆ, ಕ್ಷಮೆ ಇರಲಿ,” ಎಂದಿದ್ದಾರೆ.