ಬೆಂಗಳೂರು, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಇಂದು ಸಲ್ಲಿಕೆಯಾಗಬೇಕಿದ್ದ ನಾಮಪತ್ರ ಸಲ್ಲಿಕೆ ಮುಂದೂಡಿಕೆಯಾಗಿದ್ದು, ಸೋಮವಾರ ಅಧಿಕೃತವಾಗಿ ಸಲ್ಲಿಕೆಯಾಗಲಿದೆ.
ಈ ಮೊದಲು ಮಾರ್ಚ್ 25ಕ್ಕೆ ಅಂದರೆ ಸೋಮವಾರವೇ ನಾಮಪತ್ರ ಸಲ್ಲಿಕೆ ಮಾಡುವ ಬಗ್ಗೆ ಯೋಜನೆ ಸಿದ್ದವಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಗುರುವಾರ ಮಧ್ಯಾಹ್ನ ಸಾಂಕೇತಿಕವಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಹಿತಿ ಬಂದಿತ್ತು. ಆದರೆ ಈಗ ಈ ಸಾಂಕೇತಿಕ ನಾಮಪತ್ರ ಸಲ್ಲಿಕೆಯನ್ನು ಬಿಟ್ಟು ಸೋಮವಾರವೇ ಅಧಿಕೃತವಾಗಿ ನಾಮಪತ್ರ ಸಲ್ಲಿಕೆಯಾಗಲಿದೆ.
ಖಾಸಗಿ ಸುದ್ದಿ ವಾಹಿನಿಗೆ ಮಾತನಾಡಿದ ಜೆಡಿಎಸ್ ಶಾಸಕ ಪುಟ್ಟರಾಜು, ಸೋಮವಾರದಂದು ಎಲ್ಲಾ ನಾಯಕರ ಸಮ್ಮುಖದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ನಾಮಪತ್ರ ಸಲ್ಲಿಕೆಗೆ ಸೇರಿದ್ದ ಜನಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.