ಬೆಂಗಳೂರು , ನ. 5 : ಮಿಂಟೋ ಆಸ್ಪತ್ರೆ ಮುಷ್ಕರ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ಹೇಳಿದ್ದಾರೆ.
“ಮಿಂಟೋ ಆಸ್ಪತ್ರೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಆದ ತಪ್ಪಿನಿಂದ ಕಣ್ಣು ಕಳೆದುಕೊಂಡವರು ಹಾಗೂ ಸಂತ್ರಸ್ತರ ಪರ ನಡೆದ ಹೋರಾಟದ ವೇಳೆ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು. ಇಬ್ಬರಿಗೂ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ. ಸರ್ಕಾರ ಇರುವುದೇ ಸಮಾಜ ಮತ್ತು ನಾಗರಿಕರಿಗಾಗಿ,” ಎಂದು ಮಾಧ್ಯಮದವರ ಜತೆ ಮಾತನಾಡುತ್ತಾ ಸಚಿವರು ತಿಳಿಸಿದ್ದಾರೆ.