ಮುಂಬೈ, ಮಾ.12, ನ್ಯೂಸ್ ಎಕ್ಸ್ ಪ್ರೆಸ್: ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಮಂಗಳವಾರ ಬಿಜೆಪಿ ಸೇರಿದರು. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಬಿಜೆಪಿಯ ಹಿರಿಯ ನಾಯಕರು ಸುಜಯ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಲೋಕಸಭೆ ಚುನಾವಣೆಯಲ್ಲಿ ಅಹ್ಮದ್ನಗರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ನಿಂದ ಅವಕಾಶ ದೊರೆಯದಿರುವುದು ಖಚಿತವಾದ ಹಿನ್ನೆಲೆಯಲ್ಲಿ ಸುಜಯ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ವಿಷಯವಾಗಿ ಶರದ್ ಪವಾರ್ ನೇತೃತ್ವದ ಎನ್ಸಿಪಿ ಜತೆ ಕಾಂಗ್ರೆಸ್ ಈಚೆಗೆ ಒಪ್ಪಂದ ಮಾಡಿಕೊಂಡಿತ್ತು. 26 ಕ್ಷೇತ್ರಗಳನ್ನು ಉಳಿಸಿಕೊಂಡಿದ್ದ ಕಾಂಗ್ರೆಸ್ 22 ಕ್ಷೇತ್ರಗಳನ್ನು ಎನ್ಸಿಪಿಗೆ ಬಿಟ್ಟುಕೊಟ್ಟಿದೆ.