ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಇಲ್ಲಿನ ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಆರಂಭವಾಗಿರುವ ಬಿಜೆಪಿ-ಜೆಡಿಎಸ್ ಬೆಂಬಲಿಗರ ಬೃಹತ್ ಮೆರವಣಿಗೆ ಚುನಾವಣೆಗೆ ಮುನ್ನವೇ ಮೈತ್ರಿ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.
ಮುಂಜಾನೆಯಿಂದಲೇ ರಾಮಣ್ಣ ಶ್ರೇಷ್ಠಿ ಪಾರ್ಕ್ ನ ಗಣೇಶನ ಗುಡಿ ಅಂಗಳಕ್ಕೆ ಬೆಂಬಲಿಗರು ದೌಡಾಯಿಸುತ್ತಿದ್ದು, ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದಾರೆ. ಬೇಸಿಗೆಯ ಉರಿ ಬಿಸಿಲನ್ನು ಲೆಕ್ಕಿಸದೇ ಎರಡೂ ಪಕ್ಷಗಳ ಬೆಂಬಲಿಗರು ಮೆರವಣಿಗೆಯಲ್ಲಿ ನೆರೆದಿದ್ದು, ಶಿವಮೊಗ್ಗದ ಹೃದಯಭಾಗ ಕೇಸರಿಮಯವಾಗಿ ಮಾರ್ಪಟ್ಟಿದೆ. ಬಿಜೆಪಿ ಬೆಂಬಲಿಗರು ಕೇಸರಿ ಟೋಪಿ, ಹೆಗಲಿಗೆ ಶಾಲು ಹಾಕಿಕೊಂಡಿದ್ದರೆ ಜೆಡಿಎಸ್ ಬೆಂಬಲಿಗರು ಹಸಿರು ಶಾಲು ಧರಿಸಿ ಹೆಜ್ಜೆ ಹಾಕಿದ್ದಾರೆ.
ಮೆರವಣಿಗೆಗೆ ಮುನ್ನ ಬಿ.ವೈ. ರಾಘವೇಂದ್ರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ವಿಧಾನಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್, ಮಾಜಿ ಶಾಸಕ ಹರತಾಳು ಹಾಲಪ್ಪ ಇದ್ದರು.