ರಾಹುಲ್ ಪ್ರಧಾನಿಯಾಗುವುದು ಸೂರ್ಯ ಚಂದ್ರರಷ್ಟೇ ಸತ್ಯ: ಡಿಕೆಶಿ

ರಾಹುಲ್ ಪ್ರಧಾನಿಯಾಗುವುದು ಸೂರ್ಯ ಚಂದ್ರರಷ್ಟೇ ಸತ್ಯ: ಡಿಕೆಶಿ

ಹಾವೇರಿ, ಮಾ.9, ನ್ಯೂಸ್ ಎಕ್ಸ್ ಪ್ರೆಸ್: ಕೇಂದ್ರ ಸರ್ಕಾರದ ವರ್ಚಸ್ಸು ಕಡಿಮೆಯಾಗುತ್ತಿದೆ. ಇತ್ತೀಚೆಗೆ ನಡೆದ ಯಾವ ಚುನಾವಣೆಯಲ್ಲೂ ಬಿಜೆಪಿ ಗೆದ್ದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು, ರಾಹುಲ್ ಪ್ರಧಾನಿಯಾಗುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹಾವೇರಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ದೇಶದ ಐಕ್ಯತೆಗೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದೆ. ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದಂತಹ ದೆಹಲಿ ಚುನಾವಣೆ, ಬಿಹಾರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿಲ್ಲ. ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಲು ಆಗಿಲ್ಲ. ಉತ್ತರಪ್ರದೇಶ ಹೊರತು ಪಡಿಸಿ ಎಲ್ಲಾ ಕಡೆ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರ ಉದ್ಯೋಗ ಖಾತ್ರಿ, ಶಿಕ್ಷಣ ಹಕ್ಕು, ಆರ್‍ಟಿಐ ನಂತಹ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯಲ್ಲಿ ತನ್ನ ಭರವಸೆ ಈಡೇರಿಸಿಲ್ಲ. ಸೋನಿಯಾಗಾಂಧಿಯವರು ಪ್ರಧಾನಮಂತ್ರಿ ಹುದ್ದೆಯನ್ನು ನಿರಾಕರಿಸುವ ಮೂಲಕ ವಿಶ್ವದಲ್ಲೇ ದಾಖಲೆ ಬರೆದಿದ್ದಾರೆ ಎಂದು ಹೇಳಿದರು.

ಹಾವೇರಿ ಜಿಲ್ಲೆಯ ಕೆರೆಗಳನ್ನು ತುಂಬಿಸಲು 212 ಕೋಟಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದನ್ನು ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಒತ್ತಡ ಹೇರಿದ್ದರು. ಇತ್ತೀಚೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಒಟ್ಟು 544 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಕ್ರಮಕೈಗೊಂಡಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos