ಬೆಂಗಳೂರು: ಒಂದೆಡೆ ಬಿಸಿಲಿನ ಝಳ, ಮತ್ತೊಂದೆಡೆ ನೀರಿನ ಕೊರತೆಯಿಂದ ರಾಜ್ಯದ ಜನ ಹೈರಾಣಾಗಿ ಹೋಗಿದ್ದಾರೆ. ಈ ಬಾರಿಯ ಬಿರು ಬೇಸಿಗೆಗೆ ಜನ ಕಂಗಾಲಾಗಿ ಹೋಗಿದ್ದು, ಯಾವಾಗ ವರುಣ ದೇವ ಕೃಪೆ ತೋರಿ ಧರೆಗಿಳಿಯುತ್ತಾನೆ ಎಂದು ಆಕಾಶದತ್ತ ನೋಡುತ್ತಿದ್ದಾರೆ.
ಈ ಬಾರಿ ನಿರೀಕ್ಷೆಗೂ ಮೊದಲೇ ನೀರಿನ ಬಿಕ್ಕಟ್ಟು ಆರಂಭವಾಗಿದ್ದು, ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನ ಮಳೆಗಾಗಿ ಕಾಯುತ್ತಿದ್ದಾರೆ. ಬಿಸಿಲಿನ ಧಗೆ ಕಡಿಮೆಯಾಗಲು ಹಾಗೂ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳದಿರಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ಈ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಜನರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ.
ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಮುಂದುವರೆಯಲಿದೆ.