ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಹವಾ ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ. ಆರ್ಸಿಬಿ ಪಂದ್ಯ ತನ್ನ ತವರಿನಲ್ಲೇ ನಡೆಯುವುದರಿಂದ ಕ್ರೀಡಾಂಗಣಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಹರಿದುಬರಲಿದೆ. ಹೀಗಾಗಿ ಬಂದೋಬಸ್ತ್ಗಾಗಿ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರ್ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ 6 ವಿಕೆಟ್ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್ಗಳಿಂದ ಜಯ ಸಾಧಿಸಿತು. ಇಂದು ಐಪಿಎಲ್ 2024ರಲ್ಲಿ ಈ ಎರಡು ತಂಡಗಳು ಗೆಲುವಿಗಾಗಿ ಕಾದಾಡಲಿವೆ.
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್ 17 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಆರ್ಸಿಬಿ 14 ಪಂದ್ಯಗಳಲ್ಲಿ ಜಯಗಳಿಸಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಗುರಿಯನ್ನು ಪಂಜಾಬ್ ಹೊಂದಿದೆ.