ಹಾಸನ: ಕಾಂಗ್ರೆಸ್ನ ಕೆಲ ಶಾಸಕರು ದೆಹಲಿಯಲ್ಲಿದ್ದಾರೆ, ಮುಂಬೈಯಲ್ಲಿದ್ದಾರೆ ಎಂಬ ವದಂತಿಗೆ ತಲೆಕೆಡಿಸಿಕೊಂಡಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಶಾಸಕರು ಎಲ್ಲೂ ಹೋಗಿಲ್ಲ. ಆ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ನಮ್ಮ ಸರ್ಕಾರ 5 ವರ್ಷ ಸ್ಥಿರ ಆಡಳಿತ ನಡೆಸುತ್ತದೆ ಎಂದು ತಿಳಿಸಿದರು.
ಹಳ್ಳಿಗಳಲ್ಲಿ ಬೇಕಾಬಿಟ್ಟಿ ಮದ್ಯ ಮಾರಾಟ ಮಾಡುವುದಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕೆಂದು ಕಟ್ಟಪ್ಪಣೆ ಮಾಡಿದ್ದಾರೆ.ಮದ್ಯ ಮಾರಾಟದಿಂದ ಬಡವರಿಗೆ ತೊಂದರೆಯಾಗುತ್ತಿದೆ. ಅಕ್ರಮ ಮದ್ಯ ಮಾರಾಟಕ್ಕೆ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕಡಿವಾಣ ಹಾಕಬೇಕು ಎಂದು ಹೇಳಿದರು.ಲೋಕಸಭಾ ಹಾಗೂ ಶಾಸಕರ ಅನುದಾನವನ್ನು ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ನರೇಗಾ ಅನುದಾನದ ಹಣ ವೆಚ್ಚ ಮಾಡಬೇಕು. ಕಂದಾಯ ಇಲಾಖೆ ಅಧಿಕಾರಿಗಳು, ವಿಧವಾ, ವೃದ್ಧಾಪ್ಯ ವೇತನ ಸಮರ್ಪಕವಾಗಿ ವಿತರಿಸಬೇಕು ಎಂದು ಹೇಳಿದರು.