ನಮ್ಮ ಪರಿಶ್ರಮಕ್ಕೆ ಕ್ಷೇತ್ರದ ಜನ ಫಲ ನೀಡಲಿದ್ದಾರೆ: ಸಂಯುಕ್ತಾ ಪಾಟೀಲ

ನಮ್ಮ ಪರಿಶ್ರಮಕ್ಕೆ ಕ್ಷೇತ್ರದ ಜನ ಫಲ ನೀಡಲಿದ್ದಾರೆ: ಸಂಯುಕ್ತಾ ಪಾಟೀಲ

ಬಾಗಲಕೋಟೆ:ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಪ್ರಚಾರಕ್ಕೆ ಬರುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಚುನಾವಣೆಯಲ್ಲಿ ಗೆದ್ದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡುವುದು ನನ್ನ ಕನಸು ಎಂದು ಬಾಗಲಕೋಟೆ ಕ್ಷೇತ್ರದಿಂದ ಕಣಕ್ಕಿಳಿದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ಭರ್ಜರಿಯಾಗಿ ಪ್ರಚಾರ ನಡೆಯುತ್ತಿದೆ. ಜಿಲ್ಲಾ ಪಂಚಾಯಿತಿ ಮಟ್ಟದ ಸಭೆಯಿಂದ ಹಿಡಿದು ಸಾರ್ವಜನಿಕ ಸಭೆ-ಸಮಾರಂಭಗಳೂ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದಿವೆ. ಲೋಕಸಭಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮುಖಂಡರು ಹಾಗೂ ಸ್ಥಳೀಯರನ್ನು ಭೇಟಿ ಮಾಡಿದ್ದೇನೆ. ಮಹಿಳಾ ಮುಖಂಡರನ್ನೂ ಭೇಟಿ ಮಾಡಿದ್ದೇನೆ. ಎಲ್ಲರೂ ಪ್ರಚಾರದಲ್ಲಿ ತೊಡಗಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ.

ಜನರ ಅಭಿಪ್ರಾಯ ಉತ್ತಮವಾಗಿದೆ. ನೂರಕ್ಕೆ ನೂರರಷ್ಟು ಗೆಲುವಿನ ನಿರೀಕ್ಷೆ ಇದೆ. ಕಾಂಗ್ರೆಸ್​ ಪಕ್ಷ ಜನರಿಗಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳೇ ಇದಕ್ಕೆ ಕಾರಣ. ರಾಜ್ಯದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಇದಕ್ಕೆ ಮತ್ತೊಂದು ಉದಾಹರಣೆ.

ನಾಲ್ಕು ಭಾರಿ ಜಯಗಳಿಸಿರುವ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಏನು ಕೆಲಸ ಮಾಡಿದ್ದಾರೆ ಅನ್ನೋದು ಕ್ಷೇತ್ರದ ಜನ ಗಮನಿಸಿದ್ದಾರೆ. ಅವರು ಏನು ಮಾಡಿದ್ದಾರೆ, ಏನು ಮಾಡಿಲ್ಲ ಎಂಬುದು ಮುಖ್ಯವಲ್ಲ. ಮುಂದಿನ ಐದು ವರ್ಷದಲ್ಲಿ ಜಿಲ್ಲೆಯ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನಾನು ಕೆಲಸ‌ ಮಾಡಿ ತೋರಿಸುತ್ತೇನೆ. ಬರುವ ಐದು ವರ್ಷಗಳ ಕಾಲ ನಿಮಗಾಗಿ ಶ್ರಮಿಸುವೆ. ನನಗೂ ಅವಕಾಶ ಕೊಡಿ. ಆದರೆ, ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಎಲ್ಲರೂ ಪರಿಶ್ರಮ ವಹಿಸುತ್ತಿದ್ದಾರೆ. ನಮ್ಮ ಪರಿಶ್ರಮಕ್ಕೆ ಕ್ಷೇತ್ರದ ಜನ ಫಲ ನೀಡಲಿದ್ದಾರೆ ಎಂಬ ವಿಶ್ವಾಸ ಇದೆ.

ಫ್ರೆಶ್ ನ್ಯೂಸ್

Latest Posts

Featured Videos