ಶರತ್, ರಮೇಶ್ ಕುಮಾರ್ ಭೇಟಿ..!

ಶರತ್, ರಮೇಶ್ ಕುಮಾರ್ ಭೇಟಿ..!

ಕೋಲಾರ,ಡಿ. 13 : ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಹೊಸಕೋಟೆ ನೂತನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿರುವ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ರಮೇಶ್ ಕುಮಾರ್ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ಶರತ್ ನಡೆ ತೀವ್ರ ಕುತೂಹಲ ಕೆರಳಿಸಿದೆ.
ರಾಜಕೀಯ ಬಗ್ಗೆ ಚರ್ಚೆ :
ಹೊಸಕೋಟೆಯ ಪರಾಜಿತ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದ ನಂತರ ನೂತನ ಪಕ್ಷೇತರ ಶಾಸಕ ಶರತ್, ರಮೇಶ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಶರತ್ ಜೊತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿ ರಮೇಶ್ ಕುಮಾರ್ ಶುಭಾಶಯ ಕೋರಿದ್ದಾರೆ. ನಂತರ ರಮೇಶ್ ಕುಮಾರ್ ಅವರ ಬಳಿ ಆಶೀರ್ವಾದ ಪಡೆದು ಶರತ್ ವಾಪಸ್ ಆಗಿದ್ದಾರೆ.
ಸದ್ಯಕ್ಕೆ ಬಿಜೆಪಿಗೆ ಪಕ್ಷಕ್ಕೆ ಸೇರಿಸಿಕೊಳ್ಳಲೂ ಆಗದೆ, ಇತ್ತ ಉಚ್ಚಾಟನೆ ಮಾಡಲೂ ಆಗದೆ ಬಿಸಿ ತುಪ್ಪವಾಗಿ ಶರತ್ ಪರಿಣಮಿಸಿದ್ದಾರೆ. ಹೀಗಿರುವಾಗ ಶರತ್ ಅವರು ಹಿರಿಯ ಕಾಂಗ್ರೆಸ್ ಮುಖಂಡನ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos