ಮೈಸೂರು, ಜು. 19 : ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್, ಮೈತ್ರಿ ಸರ್ಕಾರದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ರಾಜೀನಾಮೆ ಕೊಟ್ಟರೆ ಸ್ಪೀಕರ್ ಪರಿಗಣಿಸಬೇಕು. ವಿನಾಕಾರಣ ತಡಮಾಡಿ ಕಾಂಗ್ರೆಸ್-ಜೆಡಿಎಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷ, ಮೈತ್ರಿ ಸರ್ಕಾರದ ಏಜೆಂಟರಂತೆ ಸ್ಪೀಕರ್ ವರ್ತಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಶಾಸಕರನ್ನು ಅಪಹರಣ ಮಾಡಿಲ್ಲ. ಶಾಸಕರು ಚಿಕ್ಕಮಕ್ಕಳಲ್ಲ, ಅವರನ್ನು ಅಪಹರಿಸಲು ಸಾಧ್ಯವಿಲ್ಲ. ಶಾಸಕರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸ್ವತಃ ಅವರೇ ಸರ್ಕಾರದ ವಿರುದ್ಧ ಧ್ವನಿಯೆತ್ತಿ ಹೊರನಡೆದಿದ್ದಾರೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕಾಗಿ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಚಾಮುಂಡೇಶ್ವರಿ ದರ್ಶನದ ಬಳಿಕ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.