ಸಿದ್ದು ವಿರುದ್ಧ ಸಿಎಂ ಗರಂ

ಸಿದ್ದು ವಿರುದ್ಧ ಸಿಎಂ ಗರಂ

ಬೆಂಗಳೂರು,ಡಿ. 21 : ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಏನೇನು ನಡೆದಿತ್ತು ಎಂಬುದು ಜಗತ್ತಿಗೆ ಗೊತ್ತಿದೆ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಮೊದಲು ವಿಪಕ್ಷ ನಾಯಕ ಸಿದ್ದರಾಮಯ್ಯ ಒಂದು ಬಾರಿ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿರುಗೇಟು ನೀಡಿದರು.
ಮಂಗಳೂರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಗಲಭೆಯನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹಾಕುತ್ತಿದ್ದಾರೆ. ಇವರು ಆಡಳಿತದಲ್ಲಿದ್ದಾಗ ಇಂತಹ ಘಟನೆಗಳು ನಡೆದಿರಲಿಲ್ಲವೇ ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮೊದಲು ನಾನು ವಾಸ್ತವ ಸ್ಥಿತಿ ತಿಳಿದುಕೊಳ್ಳುತ್ತೇನೆ.
ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ತನಿಖೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ವಾಸ್ತವ ಸ್ಥಿತಿ ತಿಳಿಯದೆ ಮಾತನಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಮಂಗಳೂರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೋಗುವುದಕ್ಕೆ ನಮ್ಮದೇನು ತಕರಾರು ಇಲ್ಲ. ಪರಿಸ್ಥಿತಿ ಅವಲೋಕಿಸಿ ಪೊಲೀಸರು ಇದನ್ನು ತೀರ್ಮಾನಿಸುತ್ತಾರೆ.
ಯಾರೇ ಹೋಗಲಿ ಶಾಂತಿಸುವ್ಯವಸ್ಥೆಗೆ ಧಕ್ಕೆ ತರಬಾರದೆಂದು ಮನವಿ ಮಾಡಿದರು. ನಾನು ಮಂಗಳೂರಿನಲ್ಲಿ ಸಭೆ ಮುಗಿದ ಬಳಿಕ ಉಡುಪಿಗೆ ತೆರಳಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳನ್ನು ಭೇಟಿಯಾಗಲಿದ್ದೇನೆ. ಆದಷ್ಟು ಬೇಗ ಶ್ರೀಗಳ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos