ಬೆಂಗಳೂರು,ಜು. 3 : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು ಹಾಗೂ 2014ಕ್ಕಿಂತ ಮೊದಲು ನೇಮಕ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಬೋಧನೆಗೆ ಸೀಮಿತಗೊಳಿಸಿದ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಜು.9 ರಂದು ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡಲು ಶಿಕ್ಷಕರ ಸಂಘ ನಿರ್ಧರಿಸಿದೆ. ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಲು ಜೂ.30ರ ವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಜು.9ರಂದು ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣ ಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಎನ್.ಎಸ್. ತಿಳಿಸಿದ್ದಾರೆ.
ಆರನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಮೇರೆಗೆ ಮುಖ್ಯ ಶಿಕ್ಷಕರಿಗೆ 10, 15, 20, 25 ಮತ್ತು 30 ವರ್ಷದ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕ ಹುದ್ದೆವರೆಗೂ ಬಡ್ತಿ ನೀಡಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು.