ಬೆಂಗಳೂರು, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಬಹುಮತ ಗಳಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆಯ ಕೂಗು ಕೇಳಿ ಬರುತ್ತಿದ್ದು, ಈ ಸಂಬಂಧ ಜೂನ್ 13 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಜೂನ್ 13 ರಂದು ನಡೆಯುವ ಮಹತ್ವದ ಸಭೆಗೆ ಎಲ್ಲ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳೂ, ಪದಾಧಿಕಾರಿಗಳಿಗೂ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಒಂದು ವೇಳೆ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾದರೆ, ಯಡಿಯೂರಪ್ಪ ಅವರು ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಅರವಿಂದ್ ಲಿಂಬಾವಳಿ ಅವರ ಹೆಸರು ಸೂಚಿಸಲು ಮುಂದಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಆರ್ ಎಸ್ಎಸ್ ಸಹ ಬಿಜೆಪಿ ಅಧ್ಯಕ್ಷ ನೇಮಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದು, ಯಡಿಯೂರಪ್ಪನವರಿಗೆ ಶಾಕ್ ನೀಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.