ಬೆಂಗಳೂರು, ಆ. 15 : ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿ ಒಟ್ಟು 6 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 205 ಮಿ.ಮೀ.ಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮಹಾರಾಷ್ಟ್ರ ಮತ್ತು ಛತ್ತೀಸಗಢದಲ್ಲಿ ವಾಯುಭಾರ ಕುಸಿತ ಹಿನ್ನಲೆ ಮುಂಗಾರು ಮಾರುತಗಳು ಮತ್ತಷ್ಟುಚುರುಕುಗೊಂಡಿದ್ದು, ಬೆಳಗಾವಿ, ಮೈಸೂರು ಹಾಗೂ ಹಾಸನದಲ್ಲಿ ಮುಂದಿನ 24 ಗಂಟೆಗಳಲ್ಲಿ 115 ಮಿ.ಮೀ.ನಿಂದ 205 ಮಿ.ಮೀ.ವರೆಗೆ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಆ.16 ರಿಂದ ಆ.18 ರವರೆಗೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಉಳಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.