ಬೆಂಗಳೂರು, ಜು. 11 : ಇತ್ತೀಚಿನ ದಿನಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಉಹಿಸಲಾಗದಂತಹ ಬದಲಾವಣೆಗಳು ನಡೆಯುತ್ತಿದ್ದು, ಅತೃಪ್ತ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಹೌದು, ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು, ಕೆಲವೊಂದು ನಿರ್ದೇಶನಗಳನ್ನು ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ರಾಜೀನಾಮೆ ನೀಡಿರುವ ಶಾಸಕರುಗಳು ಇಂದು ಸಂಜೆ 6 ಗಂಟೆಯೊಳಗಾಗಿ ಸ್ಪೀಕರ್ ಅವರ ಮುಂದೆ ಹಾಜರಾಗಲು ನ್ಯಾಯಾಲಯ ಆದೇಶಿಸಿದ್ದು, ಈ ಶಾಸಕರುಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ, ಮುಂಬೈನಲ್ಲಿರುವ ಎಲ್ಲ ಶಾಸಕರುಗಳು ಇಂದು ಬೆಂಗಳೂರಿಗೆ ವಾಪಾಸ್ಸಾಗಿ ಸ್ಪೀಕರ್ ಮುಂದೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.