ಬೆಂಗಳೂರು: ರಾಜ್ಯದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಕರ್ನಾಟಕದಲ್ಲಿ ಜಂಟಿಯಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಈಗಾಗಲೇ ಜೆಡಿಎಸ್ ನಾಯಕರು, ಬಿಜೆಪಿ ಹೈಕಮಾಂಡ್ ಮಾತುಕತೆ ನಡೆಸಿ ಮೈತ್ರಿ ಫೈನಲ್ ಮಾಡಿಕೊಂಡಿದ್ದಾರೆ. ಆದ್ರೆ, ಕ್ಷೇತ್ರ ಹಂಚಿಕೆಯಲ್ಲಿ ಎರಡೂ ಪಕ್ಷಗಳ ನಡುವೆ ಕಗ್ಗಂಟಾಗಿದೆ. ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ. ಒಂದು ಕಡೆ ಜೆಡಿಎಸ್ ಮಂಡ್ಯವನ್ನು ತಮಗೆ ಬಿಟ್ಟು ಕೊಡುವಂತೆ ಬೇಡಿಕೆ ಇಟ್ಟಿದ್ದರೆ, ಇತ್ತ ಬಿಜೆಪಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಚಿಂತನೆ ನಡೆಸಿದೆ. ಇದರಿಂದ ಉಭಯ ಪಕ್ಷಗಳ ನಡುವೆ ಮಂಡ್ಯ ಕ್ಷೇತ್ರಕ್ಕಾಗಿ ಪೈಪೋಟಿ ನಡೆದಿದೆ. ಇದರ ಮಧ್ಯೆ ಸುಮಲತಾ ಅಂಬರೀಶ್ ಮಾತ್ರ ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಇತ್ತ ಸಂಸದೆ ಸುಮಲತಾ ಅಂಬರೀಶ್, ನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ, ಸಿದ್ದಾಂತ ಬಿಡಲ್ಲ ಎಂದಿದ್ದಾರೆ. ಈ ಹೇಳಿಕೆಯೊಂದಿಗೆ ಸುಮಲತಾ ಪರೋಕ್ಷವಾಗಿ ಮೈತ್ರಿ ಖಡಕ್ ಸಂದೇಶ ರವಾನಿಸಿದ್ದಾರೆ.