ಬೆಂಗಳೂರು, ನ. 4: ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ವಿಡಿಯೋ ವೈರಲ್ ಆಗಿರುವುದು ನನ್ನ ಮನಸ್ಸಿಗೆ ಬಹಳ ನೋವು ತಂದಿದೆ. ಅನರ್ಹ ಶಾಸಕರಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು, ಅವರು ಬಿಜೆಪಿ ಸೇರುತ್ತಾರೆ ಎಂದು ಹೇಳಿಲ್ಲ.
ಅವರ ಪಕ್ಷದ ಅವ್ಯವಸ್ಥೆಯಿಂದ ರಾಜೀನಾಮೆ ನೀಡಿದ್ದಾರೆ. ಅದರಿಂದ ಸಹಜವಾಗಿ ನಮ್ಮ ಸರ್ಕಾರ ಬಂದಿದೆ ಎಂದಿದ್ದಾರೆ. ಅದನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿರುವುದು ನೋವು ತಂದಿದೆ. ಈ ಪ್ರಕರಣವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಶಿಸ್ತಿನ ಪಕ್ಷದಲ್ಲಿ ಈ ರೀತಿ ಆಗಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಪ್ರವಾಹ ಬರುತ್ತದೆ. ಅದೇ ಬೇರೆ ಪಕ್ಷದ ನಾಯಕರು ಮುಖ್ಯಮಂತ್ರಿ ಆದರೆ ಬರಗಾಲ ಬರುತ್ತದೆ ಎಂದು ಸಚಿವ ವಿ. ಸೋಮಣ್ಣ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಆರು ಬಾರಿ ನೆರೆ ಸಂತ್ರಸ್ಥರ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ.
ಮುಖ್ಯಮಂತ್ರಿ ನೆರೆ ಸಂತ್ರಸ್ಥರಿಗೆ ಹೆಚ್ಚಿನ ಪರಿಹಾರ ನೀಡುವ ಕೆಲಸವನ್ನು ಮಾಡಿದ್ದಾರೆ. ಸಂತ್ರಸ್ತರ ಪರಿಹಾರ ಹಣ ಮಧ್ಯವರ್ತಿಗಳಿಗೆ ಹೋಗಿಲ್ಲ. ಅದು ಅವರ ಖಾತೆಗೆ ನೇರವಾಗಿ ಹೋಗಿದೆ ಎಂದು ಸ್ಪಷ್ಟಪಡಿಸಿದರು.