ಮಾಸ್ಕ್ ಕಡ್ಡಾಯ ಮಾಡುವ ಅವಶ್ಯಕತೆ ಸದ್ಯಕ್ಕೆ ಇಲ್ಲ: ಶರಣ್‌ ಪ್ರಕಾಶ್‌ ಪಾಟೀಲ್‌

ಮಾಸ್ಕ್ ಕಡ್ಡಾಯ ಮಾಡುವ ಅವಶ್ಯಕತೆ ಸದ್ಯಕ್ಕೆ ಇಲ್ಲ: ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕೊರೊನಾ ಪ್ರಕರಣಗಳು ಇದ್ದರೂ ಎಲ್ಲರಿಗೂ ಮಾಸ್ಕ್‌ ಕಡ್ಡಾಯ ಮಾಡುವ ಅಗತ್ಯವಿಲ್ಲ. ಜ್ವರ, ಶೀತ, ನೆಗಡಿ ಇದ್ದವರು ಧರಿಸಿದರೆ ಸಾಕು. ನಾವು  ಉತ್ತಮವಾಗಿ ಮಾನಿಟರ್ ಮಾಡುತ್ತೇವೆ. ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ಹವಾಮಾನ ಕೂಡ ಬದಲಾವಣೆ ಇದರಿಂದಲೂ ಜ್ವರ, ನೆಗಡಿ, ಕೆಮ್ಮು ಬರುತ್ತಿದೆ ಎಂದು ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು (ಮಂಗಳವಾರ ಮೇ 27) ರಂದು ಕೋವಿಡ್‌ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಬಂದರೆ ಕೂಡಲೇ ಪೋಷಕರಿಗೆ ಕರೆ ಮಾಡಿ ಕಳುಹಿಸಿಕೊಡಬೇಕು ಎಂದರು.

ಟೆಸ್ಟಿಂಗ್‌ ವ್ಯವಸ್ಥೆ ಇದೆ

ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆಯ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದೇನೆ. ಲ್ಯಾಬ್ ವ್ಯವಸ್ಥೆ, 4 ವಿಭಾಗಗಳಲ್ಲಿ‌ ಟೆಸ್ಟಿಂಗ್ ಮಾಡಲಾಗುತ್ತದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್‌ ಬಗ್ಗೆ ಮಾಹಿತಿ ತಿಳಿಸಲು‌ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೋವಿಡ್ ಹೆಚ್ಚಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ.‌ ಜನದಟ್ಟಣೆ ಇರುವ ಸ್ಥಳದಲ್ಲಿ ಹಿರಿಯರು, ಗರ್ಭಿಣಿ ಸ್ತ್ರೀಯರು ಮಾಸ್ಕ್ ಬಳಕೆ ಮಾಡಬೇಕು. ನೆಗಡಿ ಕೆಮ್ಮು ಇರುವ ಮಕ್ಕಳು ಶಾಲೆಗೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದರು.

ಮುಂಜಾಗ್ರತಾ ಕ್ರಮವಾಗಿ  ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು.‌ ಔಷಧ ಲಭ್ಯತೆ ಹಾಗೂ ಆಕ್ಸಿಜನ್ ಬೆಡ್ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos