ಬೆಂಗಳೂರು,ಫೆ.21-ಪ್ರವಾಸೋದ್ಯಮ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡ ಇತರೆ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಫಲಾನುಭವಿ ಯುವಕ, ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ವಿತರಿಸಲಾಯಿತು.
ವಿಧಾನಸೌಧದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಯ 112 ಮಂದಿಗೆ ಟ್ಯಾಕ್ಸಿಗಳನ್ನು ನೀಡಲಾಯಿತು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದನೆಸಿರುವ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸಲಾಗಿದ್ದು, 2018-19ನೇ ಸಾಲಿನ 557 ನಿರುದ್ಯೋಗಿ ಯುವಕ-ಯುವತಿಯರಿಗೆ 3 ಲಕ್ಷ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸಲು 16.71 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು.
ಅದೇ ರೀತಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಾದ 300 ನಿರುದ್ಯೋಗಿಗಳಿಗೆ 2018-19ನೇ ಸಾಲಿನಲ್ಲಿ 9 ಕೋಟಿ ಒದಗಿಸಲು ಆದೇಶ ಹೊರಡಿಸಲಾಗಿತ್ತು. ಫಲಾನುಭವಿಗಳು ಶೇ.5ರಷ್ಟು ಹಣ ಭರಿಸಬೇಕಿದ್ದು, ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್ಗಳ ಮೂಲಕ ಉಳಿದ ಮೊತ್ತ ದೊರೆಯಲಿದೆ.
ಕಾರ್ಯಕ್ರಮದಲ್ಲಿ ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು ಮತ್ತಿತರರು ಪಾಲ್ಗೊಂಡಿದ್ದರು.