ಉಡುಪಿ, ಮಾ.26, ನ್ಯೂಸ್ ಎಕ್ಸ್ ಪ್ರೆಸ್: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಅಂತಿಮ ಕ್ಷಣದಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಂಡ ಅಮೃತ್ ಶೆಣೈ ಮಧ್ಯಾಹ್ನ 2.45ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು. ಅವರೊಂದಿಗೆ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ ಡಿಸೋಜ ಹಾಜರಿದ್ದರು.
“ನಾನು ಕೂಡ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ನನಗೆ ಅವಕಾಶ ಸಿಗಲಿಲ್ಲ. ಆದುದರಿಂದ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ವಿರೋಧಿಸಿ ಈ ಬಾರಿ ಚುನಾವಣೆ ಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಅದಕ್ಕಾಗಿ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಈವರೆಗೆ ಕಾಂಗ್ರೆಸ್ ಪಕ್ಷಕ್ಕೆ ಈವರೆಗೆ ರಾಜೀನಾಮೆ ನೀಡಿಲ್ಲ. ಮುಂದೆ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅಮೃತ್ ಶೆಣೈ ತಿಳಿಸಿದ್ದಾರೆ.