ಉಡುಪಿ: ರಾಜ್ಯದ ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ಹೆಚ್ಚಳ ಮತ್ತು ವಿವಿಧ ಸೌಲಭ್ಯಗಳ ಮಂಜೂರಾತಿ ಕುರಿತಂತೆ ಸರಕಾರದ ಗಮನಕ್ಕೆ ತಂದು ಜಾರಿಗೆ ಪ್ರಯತ್ನಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ತಿಳಿಸಿದ್ದಾರೆ. ಅವರು ಶನಿವಾರ, ಕೋಟಾ ವಿವೇಕ ಸ್ಕೂಲ್ ಆವರಣದಲ್ಲಿ ನಡೆದ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕøತಿಕ ಸ್ಪರ್ದೇಗಳ ಹೊಳಪು-2018 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ವನ್ನು ರೂ.1000 ದಿಂದ 3000 ಕ್ಕೆ ಹೆಚ್ಚಿಸುವ ಬೇಡಿಕೆ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ, ರೂ.5 ಲಕ್ಷದ ವೆರೆಗಿನ ಆರೋಗ್ಯ ವಿಮೆ, ಗ್ರಾಮ ಪಂಚಾಯತ್ ಸದಸ್ಯರಿಗೆ ತಾಲೂಕು ವ್ಯಾಪ್ತಿಯಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಿಗೆ ಜಿಲ್ಲೆಯಲ್ಲಿ ಸಂಚರಿಸಲು ಉಚಿತ ಬಸ್ ನೀಡುವ ಕುರಿತಂತೆ ಸರಕಾರದ ಗಮನಕ್ಕೆ ತಂದು ಮಂಜೂರಾತಿಗೆ ಪ್ರಯತ್ನಿಸಲಾಗುವುದು, ಸದಾ ಕಾಲ ಸಾರ್ವಜನಿಕರ ಸೇವೆಗಾಗಿ ಕರ್ತವ್ಯ ನಿರ್ವಹಿಸುವ ಜನಪ್ರತಿನಿಧಿಗಳು, ಈ ರೀತಿಯ ಕ್ರೀಡಾಕೂಟ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆ ಮೂಲಕ ಹೆಚ್ಚಿನ ಉತ್ಸಾಹ ಪಡೆದು ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಡಾ. ಜಯಮಾಲಾ ಹೇಳಿದರು.
ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಒಟ್ಟು 450 ಸಂಸ್ಥೆಗಳ 104 ತಂಡಗಳು ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಆಕರ್ಷಕ ಪಥ ಸಂಚಲನ ನಡೆಸಿದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಜವಾಬ್ದಾರಿ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳಿಗಿದೆ, 14 ನೇ ಹಣಕಾಸು ಆಯೋಗದಡಿ ಬಿಡುಗಡೆಯಾಗುವ ಸಂಪೂರ್ಣ ಅನುದಾನ ಅಭಿವೃಧ್ದಿ ಕಾರ್ಯಗಳಿಗೆ ಮಾತ್ರ ಬಳಕೆಯಾಗಬೇಕು ಹಾಗೂ ಬಿಡುಗಡೆಯಾಗುವ ಅನುದಾನ ಮೊತ್ತದ ಹೆಚ್ಳಳ ಕುರಿತಂತೆ ಕೇಂದ್ರದಲ್ಲಿ ಪ್ರಸ್ತಾಪಿಸಲಾಗುವುದು ಮತ್ತು ರಾಜ್ಯ ಸರ್ಕಾರ ಸಹ ಈ ಕುರಿತಂತೆ ಆದೇಶ ನೀಡಬೇಕು ಈ ಮೂಲಕ ಪಂಚಾಯತ್ ಗಳಿಗೆ ಹೆಚ್ಚಿನ ಶಕ್ತಿ ತುಂಬಬೇಕು ಎಂದು ಹೇಳಿದರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ವಿವಿಧ ಬೇಡಿಕೆ ಕುರಿತು ವಿವರಿಸಿದರು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಕ್ರೀಡಾ ಜ್ಯೋತಿ ಬೆಳಗಿಸಿದರು.
ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ವಿಧಾನ ಪರಿಸತ್ ಸದಸ್ಯ ಐಯನೂರು ಮಂಜುನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕೋಟಾ ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ, ಮಾಜಿ ಸಂಸದ ಜಯಪ್ರಕಾಶ್ ಶೆಟ್ಟಿ, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಹಾಗೂ ವಿವಿಧ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.