ಬೆಂಗಳೂರು, ಮಾ.4, ನ್ಯೂಸ್ ಎಕ್ಸ್ ಪ್ರೆಸ್: ಶಾಸಕ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವನ್ನು ಕಾನೂನ್ಮಾಕವಾಗಿ ಪರಿಶೀಲಿಸಿ 2 ದಿನಗಳಲ್ಲಿ ತೀರ್ಮಾನಿಸುವುದಾಗಿ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ ಉಮೇಶ್ ಜಾಧವ್ ನನ್ನನ್ನು ಭೇಟಿ ಮಾಡಿ ವೈಯಕ್ತಿಕ ಕಾರಣದಿಂದಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದಾರೆ. ನಾನು ಕಾನೂನಿನ ಅಂಶಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ತಿಳಿಸಿದರು.
ಈಗಾಗಲೇ ಜಾಧವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರು ನೀಡಿದೆ. ಅದನ್ನು ಕೂಡ ಪರಿಶೀಲನೆ ಮಾಡಿದ್ದೇನೆ. ಅವರ ರಾಜೀನಾಮೆ ಪತ್ರವನ್ನು ಪರಿಶೀಲಿಸಲಾಗಿದೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ತೀರ್ಮಾನ ಪ್ರಕಟಿಸುತ್ತೇನೆ ಎಂದರು.
ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ನೀಡಿರುವ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಜತೆ ಚರ್ಚಿಸಿ ಸಲಹೆ ಪಡೆದಿದ್ದೇನೆ. ವಿಧಾನಸಭೆ ಸ್ಪೀಕರ್ ಆಗಿ ನನ್ನ ಇತಿಮಿತಿಯಲ್ಲಿ ಏನು ಕ್ರಮ ಕೈಗೊಳ್ಳಬೇಕೋ ಅದನ್ನಷ್ಟೇ ಮಾಡಲು ಸಾಧ್ಯ. ಊಹಾಪೋಹ ಪ್ರಶ್ನೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ಬೆಳಗ್ಗೆ ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಲಿದ್ದಾರೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ.
ಏಕೆಂದರೆ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಬಿ.ನಾಗೇಂದ್ರ ಮತ್ತು ಉಮೇಶ್ ಜಾಧವ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್ ಸ್ಪೀಕರ್ ಅವರಿಗೆ ದಾಖಲೆ ಸಮೇತ ದೂರು ನೀಡಿದೆ. ಸ್ಪೀಕರ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಉಮೇಶ್ ಜಾಧವ್ ಅವರ ರಾಜಕೀಯ ಭವಿಷ್ಯ ತೀರ್ಮಾನವಾಗಲಿದೆ.