ಅನುದಾನ ನಿಯಮಾನುಸಾರ ಬಳಕೆ

ಅನುದಾನ ನಿಯಮಾನುಸಾರ ಬಳಕೆ

ಚಿಕ್ಕಬಳ್ಳಾಪುರ: ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ ಅಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು. ಅನುದಾನ ಬಳಕೆ ಮಾಡದವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಎಸ್ಸಿಪಿ ಮತ್ತು ಟಿಎಸ್ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಎಸ್‌ಸಿಪಿ, ಟಿಎಸ್‌ಪಿ ಅನುದಾನಗಳಿಗೆ ಸಂಬಂಧಿಸಿದಂತೆ ನಿಯಮಿತ ಸಮಯಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು. ಕಾಲಮಿತಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು. ಅನುದಾನ ಬಾಕಿ ಉಳಿಸಿದರೆ ಆಯಾ ಇಲಾಖೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ’ ಎಂದು ತಿಳಿಸಿದರು.
ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಕ್ರೀಯಾಯೋಜನೆಯನ್ನು ರೂಪಿಸಿ, ಸಂಬಂಧಪಟ್ಟಇಲಾಖೆ ಅಥವಾ ಅಧಿಕಾರಿಗಳಿಂದ ಅನುಮೊದನೆ ಪಡೆದುಕೊಳ್ಳಬೇಕು. ಮುಂದಿನ ಸಭೆಯೊಳಗೆ ಪ್ರತಿ ಇಲಾಖೆಯಿಂದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಗಳಲ್ಲಿ ಶೇ ೮೦ ರಷ್ಟು ಪ್ರಗತಿ ಸಾಧಿಸಲೇಬೇಕು’ ಎಂದು ತಾಕೀತು ಮಾಡಿದರು.
ಕಾಮಗಾರಿಗಳ ಶಂಕುಸ್ಥಾಪನೆ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಮಗಾರಿಗಳ ಬಗ್ಗೆ ಗಮನ ಹರಿಸಬೇಕು. ಕಳೆದ ಸಾಲಿನ ಅನುದಾನವನ್ನು ಸಮರ್ಪಕವಾಗಿ ಬಳಸಿರುವ ಕುರಿತು ವರದಿಯನ್ನು ಎಲ್ಲಾ ಇಲಾಖೆಗಳು ಪ್ರತಿ ತಿಂಗಳು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ ಸಭೆಯಲ್ಲಿ ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos