ಬೆಳಗಾವಿ, ಮಾ.4, ನ್ಯೂಸ್ ಎಕ್ಸ್ ಪ್ರೆಸ್: ಪಾಕ್ ನ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಸೇನೆ ನಡೆಸಿದ ದಾಳಿ ಬಗ್ಗೆ ಕೇಂದ್ರ ಸರ್ಕಾರ ದೇಶದ ಜನರಿಗೆ ಮನದಟ್ಟು ಮಾಡಿಕೊಡಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏರ್ ಸ್ಟ್ರೈಕ್ ಬಗ್ಗೆ ಇರುವ ಗೊಂದಲದ ಬಗ್ಗೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮನದಟ್ಟು ಮಾಡಿಕೊಡಬೇಕು. ದೇಶದ ಏಕತೆ, ಅಖಂಡತೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಭಾರತೀಯರೆಲ್ಲರೂ ಒಂದೇ ಎಂಬ ಸಂದೇಶ ವಿಶ್ವಕ್ಕೆ ಸಾರಬೇಕಾದ ಅಗತ್ಯತೆ ಇದೆ ಎಂದರು.
ಇನ್ನು ಪಾಕ್ ಪರ ಘೊಷಣೆ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ದೇಶದ್ರೋಹಿ ಘೋಷಣೆ ಸಮಾಜ ಹಾಗೂ ದೇಶಕ್ಕೆ ಮಾರಕ. ರಾಜಕೀಯ ಉದ್ದೇಶಕ್ಕಾಗಿ ನಡೆಯುತ್ತಿರುವ ದೇಶದ್ರೋಹಿ ಘೋಷಣೆ ನಿಯಂತ್ರಣಕ್ಕೆ ಬರಬೇಕು. ನಾವೆಲ್ಲರೂ ಭಾರತೀಯರು ಎಂಬ ಭಾವನೆ ಪ್ರತಿಯೊಬ್ಬರಲ್ಲಿಯೂ ಮೂಡಬೇಕು ಎಂದರು.