ಸಿಲಿಕಾನ್‌ ಸಿಟಿ ಬಾಂಬ್‌ ಸ್ಪೋಟ ಇಟ್ಟವರು ದೇಶದ್ರೋಹಿಗಳು: ಯುಟಿ ಖಾದರ್

ಸಿಲಿಕಾನ್‌ ಸಿಟಿ ಬಾಂಬ್‌ ಸ್ಪೋಟ ಇಟ್ಟವರು ದೇಶದ್ರೋಹಿಗಳು: ಯುಟಿ ಖಾದರ್

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಘಟನೆಯನ್ನು ರಾಜ್ಯದ ಎಲ್ಲ ಜನತೆ ಖಂಡಿಸಿದ್ದಾರೆ. ಇಂಥ ದೇಶದ್ರೋಹಿ ಕೃತ್ಯ ಯಾರು ಮಾಡಿದ್ದಾರೋ, ಅವರಷ್ಟೇ ಅಲ್ಲದೇ ಅವರ ಹಿಂದಿದ್ದು ಷಡ್ಯಂತ್ರ ಮಾಡಿದವರನ್ನು ಮಟ್ಟ ಹಾಕಬೇಕು ಎಂದು ವಿಧಾನಸಭೆ ಸ್ಪೀಕರ್​ ಯು.ಟಿ. ಖಾದರ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಾಂಬ್‌ ಸ್ಫೋಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಬಾಂಬ್‌ ಇಟ್ಟವರು ದೇಶ ದ್ರೋಹಿಗಳು. ಅವರಿಗೆ ಯಾವುದೇ ಜಾತಿ, ಧರ್ಮ, ವರ್ಗವಿಲ್ಲ. ಮನುಷ್ಯತ್ವ, ಕರುಣೆ ಇಲ್ಲದವರನ್ನು ನಾವು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಶಾಂತಿಯುತ, ನಿರ್ಭಯ ಸಮಾಜದಲ್ಲಿ ಮಾತ್ರ ಅಭಿವೃದ್ಧಿಯ ಜತೆಗೆ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ. ಶಾಂತಿಯುತ ರಾಜ್ಯವನ್ನು ಹದಗೆಡಿಸಲು ಪ್ರಯತ್ನಿಸಿದವರನ್ನು ಮಟ್ಟ ಹಾಕಲು ಸರಕಾರ ಕ್ರಮ ಕೈಗೊಂಡಿದೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಇದರ ಹಿಂದೆ ಯಾರಿದ್ದಾರೆ? ಅವರ ಉದ್ದೇಶ ಏನಾಗಿತ್ತು ಎಂಬುದನ್ನು ಬಯಲು ಮಾಡಬೇಕು. ಅದೇ ರೀತಿ ಮುಂದೆ ಈ ರೀತಿ ಕೃತ್ಯ ಮಾಡಲು ಯಾರಿಗೂ ಧೈರ್ಯ ಬರದಂತೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಇಂತಹ ಸಂದರ್ಭದಲ್ಲಿ ಯಾರೂ ರಾಜಕಾರಣ ಮಾಡಬಾರದು. ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ವರ್ಗವನ್ನು ಗುರಿಯಾಗಿಸಬಾರದು. ರಾಜ್ಯದ ಹಿತಾಸಕ್ತಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ಅದನ್ನು ಬಿಟ್ಟು ನಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿದರೆ ದುಷ್ಕರ್ಮಿಗಳು ಅದರ ಲಾಭವನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಎಲ್ಲರೂ ಕನ್ನಡಿಗರಾಗಿ ಒಗ್ಗಟ್ಟಾಗಿ, ಅಣ್ಣ ತಮ್ಮಂದಿರಂತೆ ಜೀವನ ನಡೆಸುತ್ತಿದ್ದೇವೆ. ನಮ್ಮನ್ನು ಬೇರ್ಪಡಿಸಲು ಯಾರಿಗೂ ಅವಕಾಶ ನೀಡಬಾರದು ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos